ಕೊರೋನಾ ವೈರಸ್ ನಿಂದಾಗಿ ಎಸ್‍ಎಸ್‍ಎಲ್ ಸಿ ಪರೀಕ್ಷೆಯನ್ನು ಹೊರತು ಪಡಿಸಿ ಉಳಿದೆಲ್ಲಾ ತರಗತಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಎಸ್‍ ಎಸ್‍ ಎಲ್ ಸಿ  ಪರೀಕ್ಷೆಯು ಮುಂದೂಡಲಾಗುತ್ತಲೇ ಇದೆ. ಹಾಗಾಗಿ 3ನೇ ಹಂತದ ಲಾಕ್ ಡೌನ್ ಮುಗಿಯುತ್ತಿದ್ದಂತೆ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಮಾಡುವ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ಶಾಲಾ ಕಾಲೇಜುಗಳನ್ನು ತೆರೆಯುವುದರ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ  ಚಿಂತಿಸಿದ್ದಾರೆ ಅಷ್ಟಕ್ಕೂ ಸಚಿವರ ಯೋಜನೆ ಏನು..? ಇಲ್ಲಿದೆ ನೋಡಿ..

 

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಾಗೂ ಪಾಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಆರಂಭಿಸುವ ಕುರಿತಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

 

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಹಿತ ಕಾಪಾಡಬೇಕಾಗಿರುವುದು ನಮ್ಮ ಹೊಣೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅವರ ಮನೆ ಪಕ್ಕದಲ್ಲೇ ಇರುವ ಪರೀಕ್ಷಾ ಕೇಂದ್ರವನ್ನು ವ್ಯವಸ್ಥೆ ಮಾಡಿಕೊಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಎಸ್​ಎಸ್​​ಎಲ್​ಸಿ ಪರೀಕ್ಷೆ ನಡೆಸುವ ವೇಳೆ ಒಂದು ಡೆಸ್ಕ್​ನಲ್ಲಿ, ಒಂದು ಕೊಠಡಿಯಲ್ಲಿ ಎಷ್ಟು ಮಕ್ಕಳನ್ನು ಕೂರಿಸಬೇಕು. ಸ್ವಲ್ಪ ಆರೋಗ್ಯದಲ್ಲಿ ಏರುಪೇರಾದರೆ ಅವರನ್ನು ಬೇರೆ ಕಡೆ ಕೂರಿಸುವ ವ್ಯವಸ್ಥೆ ಮಾಡುತ್ತೇವೆ‌. ಅವರ ತಪಾಸಣೆ, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾ ದಲ್ಲಿ ತಿಳಿಸಿದರು.

 

 

ಅದೇ ರೀತಿ ತರಗತಿಗಳನ್ನು ಶಿಫ್ಟ್‍ನಲ್ಲಿ ನಡೆಸಬೇಕೆ ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕ ಎಂಬ ಬಗ್ಗೆಯೂ ಸೋಮವಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಸೋಮವಾರದೊಳಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯೂ ಬರಲಿದ್ದು, ಕೇಂದ್ರದ ಸಲಹೆ-ಸೂಚನೆಗಳನ್ನು ಆಧರಿಸಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

 

ಎಸ್‍ಎಸ್‍ಎಲ್‍ಸಿ ಪರೀಕ್ಷಾ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್‍ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದರು.

 

ಜೂನ್ 1ರಿಂದ ಯಾವುದೇ ತರಗತಿಗಳು ಪುನರರಾರಂಭಗೊಳ್ಳುವ ಸಾಧ್ಯತೆ ಇಲ್ಲ. ಆದಷ್ಟು ಶೀಘ್ರ ಶಾಲೆ ತೆರೆಯುವ ತೀರ್ಮಾನ ಕೈಗೊಳ್ಳುತ್ತೇವೆ. ಆದರೆ, ಈ ಬಾರಿ ಶಾಲೆಗಳು ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡಬಾರದು.

 

ಸಾಧ್ಯವಾದರೆ ನಿಗದಿತ ಶುಲ್ಕಕ್ಕಿಂತ ಕಡಿಮೆ ಶುಲ್ಕ ಪಡೆಯುವಂತೆಯೂ ಮನವಿ ಮಾಡಿಕೊಂಡಿದ್ದೇವೆ ಎಂದು ಸುರೇಶ್‍ಕುಮಾರ್ ಹೇಳಿದರು.ಶಾಲೆಗಳನ್ನು ಯಾವಾಗ ಪ್ರಾರಂಭಿಸಬೇಕು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆಯಾಗಲಿವೆ ಎಂಬ ಬಗ್ಗೆಯೂ ಅಧ್ಯಯನ ನಡೆಸುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಅವರು ತಿಳಿಸಿದರು.

 

ಎಲ್‍ಕೆಜಿ, ಯುಕೆಜಿ ಮಕ್ಕಳಿಗೆ ಆನ್‍ಲೈನ್‍ನಲ್ಲಿ ಪಾಠ ಮಾಡುವುದು ಹಾಸ್ಯಾಸ್ಪದ ಸಂಗತಿ. ಅದೊಂದು ಕ್ರೂರ ವ್ಯವಸ್ಥೆ. ಅಂತಹ ವ್ಯವಸ್ಥೆಗೆ ಕಡಿವಾಣ ಹಾಕುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

 

 

 

 

 

మరింత సమాచారం తెలుసుకోండి: